ಅಹಿಂದ ಹೋರಾಟಕ್ಕೆ 25 ವರ್ಷ: ಹುಬ್ಬಳ್ಳಿಯಲ್ಲಿ ರಾಜ್ಯಮಟ್ಟದ ವಿಚಾರ ಸಂಕಿರಣ ಏ.26ಕ್ಕೆ
ಬಾಗಲಕೋಟೆ: ಅಹಿಂದ ಹೋರಾಟ ಆರಂಭವಾಗಿ 25 ವರ್ಷ ಪೂರ್ಣಗೊಂಡ ಹಿನ್ನೆಲೆಯಲ್ಲಿ ಏಪ್ರಿಲ್ 26ರಂದು ಬೆಳಗ್ಗೆ 10 ಗಂಟೆಗೆ ಹುಬ್ಬಳ್ಳಿಯಲ್ಲಿ “ಅಹಿಂದ ಹೋರಾಟ – ಸಾಧನೆ ಸಂಕಲ್ಪ” ಎಂಬ ವಿಷಯದ ಕುರಿತು ರಾಜ್ಯಮಟ್ಟದ ವಿಚಾರ ಸಂಕಿರಣ ನಡೆಯಲಿದೆ ಎಂದು ವಿಜಯಪುರ ಹಾಗೂ ಬಾಗಲಕೋಟೆ ಅಹಿಂದ ಮುಖಂಡ ಸೋಮನಾಥ ಕಳ್ಳಿಮನಿ ತಿಳಿಸಿದ್ದಾರೆ.
ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಅಲ್ಪಸಂಖ್ಯಾತ, ಹಿಂದುಳಿದ ಹಾಗೂ ದಲಿತ ಸಮುದಾಯಗಳಲ್ಲಿ ರಾಜಕೀಯ ಜಾಗೃತಿ ಮತ್ತು ಸಾಮಾಜಿಕ ಪ್ರಜ್ಞೆ ಮೂಡಿಸುವ ಉದ್ದೇಶದಿಂದ 25 ವರ್ಷಗಳ ಹಿಂದೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನೇತೃತ್ವದಲ್ಲಿ ಅಹಿಂದ ಹೋರಾಟ ಆರಂಭಗೊಂಡಿತ್ತು ಎಂದು ತಿಳಿಸಿದರು.
ಈ ಹೋರಾಟದ ಪರಿಣಾಮವಾಗಿ ರಾಜ್ಯದಲ್ಲಿ ಅಹಿಂದ ವರ್ಗಗಳಿಗೆ ಹಲವು ಅನುಕೂಲಗಳು ಲಭಿಸಿವೆ. ಈಗಿನ ಪರಿಸ್ಥಿತಿಯಲ್ಲಿ ಅಹಿಂದ ಚಳವಳಿಗೆ ಹೊಸ ದಿಕ್ಕು ನೀಡುವ ಅಗತ್ಯವಿದ್ದು, ಈ ಬಗ್ಗೆ ಹುಬ್ಬಳ್ಳಿಯಲ್ಲಿ ನಡೆಯುವ ವಿಚಾರ ಸಂಕಿರಣದಲ್ಲಿ ವಿಶ್ಲೇಷಣೆ ಹಾಗೂ ಚರ್ಚೆ ನಡೆಯಲಿದೆ ಎಂದು ಹೇಳಿದರು.
ಅಹಿಂದ ಹೋರಾಟ ಆರಂಭವಾದ ನೆನಪಿನ ಹಿನ್ನೆಲೆಯಲ್ಲಿ ನಡೆಯುತ್ತಿರುವ ಈ ಸಂಕಿರಣದಲ್ಲಿ ಅಂದಿನ ಮುಂಚೂಣಿ ನಾಯಕರು ಹಾಗೂ ಇಂದಿನ ಹೊಸ ತಲೆಮಾರಿನ ಯುವಕರು ಒಂದೇ ವೇದಿಕೆಯಲ್ಲಿ ಸೇರಿ ವಿಚಾರ ವಿನಿಮಯ ನಡೆಸಲಿದ್ದಾರೆ. ಚಳವಳಿಯ ಸಾಧನೆಗಳೊಂದಿಗೆ ಮುಂದಿನ ದಿಕ್ಕಿನ ಬಗ್ಗೆ ಮಹತ್ವದ ನಿರ್ಧಾರಗಳು ಕೈಗೊಳ್ಳುವ ಸಾಧ್ಯತೆಯಿದೆ ಎಂದು ತಿಳಿಸಿದರು.



