ರಾಜ್ಯ ಸರ್ಕಾರದಿಂದ ಮಹತ್ವದ ಆದೇಶ – 25 ನಿಗಮ ಮಂಡಳಿ ಅಧ್ಯಕ್ಷರಿಗೆ ಸಚಿವ ಸಂಪುಟ ಸ್ಥಾನಮಾನ!
25 ಶಾಸಕರ ನಿಗಮ ಮಂಡಳಿಗಳ ಅಧ್ಯಕ್ಷ ಅವಧಿ ಮುಕ್ತಾಯವಾದ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಅವರ ಅವಧಿಯನ್ನು ಮುಂದಿನ ಆದೇಶದವರೆಗೆ ವಿಸ್ತರಿಸಿ ಮಹತ್ವದ ಅಧಿಸೂಚನೆ ಹೊರಡಿಸಿದೆ. ಈ ಮೂಲಕ ರಾಜ್ಯ ಸರ್ಕಾರವು ನಿಗಮ ಮಂಡಳಿಗಳ ಅಧ್ಯಕ್ಷರಿಗೆ ಭರ್ಜರಿ ಜಾಕ್ಪಾಟ್ ನೀಡಿದೆ.
2024 ಜನವರಿ 26ರಂದು ರಾಜ್ಯದ ವಿವಿಧ ನಿಗಮ ಮತ್ತು ಮಂಡಳಿಗಳಿಗೆ ಎರಡು ವರ್ಷಗಳ ಅವಧಿಗೆ ಅಧ್ಯಕ್ಷರಾಗಿ ನೇಮಕಗೊಂಡಿದ್ದ ಒಟ್ಟು 25 ಶಾಸಕರ ಅವಧಿ ಮುಗಿದ ಹಿನ್ನೆಲೆಯಲ್ಲಿ ಅವರ ಅವಧಿ ವಿಸ್ತರಿಸಿ ರಾಜ್ಯ ಸರ್ಕಾರ ಆದೇಶಿಸಿದೆ. ಈ ಸಂಬಂಧ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆ(DPAR)ಹೊರಡಿಸಿರುವ ಅಧಿಕೃತ ಅಧಿಸೂಚನೆಯ ಪ್ರಕಾರ, ಈ ಎಲ್ಲಾ ಶಾಸಕರಿಗೆ ಸಂಪುಟ ದರ್ಜೆಯ ಸಚಿವರಿಗೆ ನೀಡುವ ಎಲ್ಲಾ ಸೌಲಭ್ಯಗಳೊಂದಿಗೆ ಮುಂದುವರಿಸಲಾಗಿದೆ. ಮುದ್ದೇಬಿಹಾಳ ಶಾಸಕ ಅಪ್ಪಾಜಿ ಸಿ.ಎಸ್.ನಾಡಗೌಡ, ಶಾಸಕ ರಾಜುಕಾಗೆ, ಗುಬ್ಬಿ ಶಾಸಕ ಶ್ರೀನಿವಾಸ್ ಸೇರಿ 25 ಮಂದಿಗೆ ಕ್ಯಾಬಿನೆಟ್ ಸ್ಥಾನಮಾನ ನೀಡಲಾಗಿದೆ.
ಶಾಸಕ ಅಪ್ಪಾಜಿ ಸಿ.ಎಸ್.ನಾಡಗೌಡ ( ಮೈಸೂರು ಸೋಪ್ಸ್ ಡಿಟರ್ಜೆಂಟ್ ಲಿಮಿಟೆಡ್ ), ಕಾಗವಾಡ ಶಾಸಕ ರಾಜುಕಾಗೆ ( ವಾಯುವ್ಯ ಸಾರಿಗೆ ನಿಗಮ), ಗುಬ್ಬಿ ಶಾಸಕ ಶ್ರೀನಿವಾಸ್ ( ಕರ್ನಾಟಕ ಸಾರಿಗೆ ಇಲಾಖೆ), ಬ್ಯಾಡಗಿ ಶಾಸಕ ಬಸವರಾಜ್ ನೀಲಪ್ಪ ಶಿವಣ್ಣನವರ್ ( ಕರ್ನಾಟಕ ಅರಣ್ಯ ಅಭಿವೃದ್ದಿ ನಿಗಮ), ಹೊಸದುರ್ಗಶಾಸಕ ಬಿ.ಜಿ.ಗೋವಿಂದಪ್ಪ( ಕರ್ನಾಟಕ ಆಹಾರ ಸರಬರಾಜು ನಿಗಮ), ಮಾಗಡಿ ಶಾಸಕ ಹೆಚ್.ಸಿ.ಬಾಲಕೃಷ್ಣ( KSRTC ), ಶಾಂತಿನಗರ ಶಾಸಕ ಎನ್ಎ ಹ್ಯಾರೀಶ್ (ಬಿಡಿಎ), ರೋಣ ಶಾಸಕ ಜಿಟಿ ಪಾಟೀಲ್ ( ಕರ್ನಾಟಕ ಖನಿಜ ಅಭಿವೃದ್ದಿ ನಿಗಮ), ಚಾಮರಾಜನಗರ ಶಾಸಕ ಪುಟ್ಟ ರಂಗಶೆಟ್ಟಿ ( ಮೈಸೂರು ಸೇಲ್ಸ್ ಇಂಟರ್ ನ್ಯಾಷನಲ್ ಲಿ.). 25 ಮಂದಿಗೆ ಸಚಿವ ಸಂಪುಟ ಸ್ಥಾನಮಾನ ನೀಡಿ ರಾಜ್ಯ ಸರ್ಕಾರ ಆದೇಶ ನೀಡಿದೆ.



