ಅಥಣಿಯಲ್ಲಿ ಕಿತ್ತೂರು ರಾಣಿ ಚೆನ್ನಮ್ಮ ನಾಮಫಲಕ ತೆರವು ವಿವಾದ, ಪಂಚಮಸಾಲಿ ಶ್ರೀಗಳ ಆಕ್ರೋಶ
ಕೆರೆ ಅಭಿವೃದ್ಧಿ ನೆಪದಲ್ಲಿ ಬೋರ್ಡ್ ತೆರವು:
ಅಥಣಿ ಪುರಸಭೆ ಮುಖ್ಯಾಧಿಕಾರಿ ಅಶೋಕ್ ಗುಡಿಮನಿ ವಿರುದ್ಧ ಸ್ವಾಮೀಜಿ ಕಿಡಿ.
ಕೆರೆ ಸುತ್ತಮುತ್ತ ರಾಜಕೀಯ ಕೆಲವು ಬೆಂಬಲಿಗರು ಒತ್ತುವರಿ ಮಾಡಿದ್ದರು, ಕಣ್ಮುಚ್ಚಿ ಕುಳಿತ ಪುರಸಭೆ
ಗುಬ್ಬಿ ಮೇಲೆ ಬ್ರಹ್ಮಾಸ್ತ್ರ ಪ್ರಯೋಗ ಮಾಡಿತ ಅಥಣಿ ಪುರಸಭೆ
ಅಥಣಿ: ಪಟ್ಟಣದಲ್ಲಿ ಕೆರೆ ಅಭಿವೃದ್ಧಿ ಕಾಮಗಾರಿ ಹೆಸರಿನಲ್ಲಿ ಕಿತ್ತೂರು ರಾಣಿ ಚೆನ್ನಮ್ಮ ವೃತ್ತದ ನಾಮಫಲಕವನ್ನು ತೆರವುಗೊಳಿಸಿರುವುದು ಈಗ ಭಾರೀ ವಿವಾದಕ್ಕೆ ಕಾರಣವಾಗಿದೆ. ಈ ಘಟನೆಗೆ ಕೂಡಲೇ ಪಂಚಮಸಾಲಿ ಪೀಠದ ಜಗದ್ಗುರು ಶ್ರೀ ಬಸವ ಜಯಮೃತ್ಯುಂಜಯ ಸ್ವಾಮೀಜಿ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದು, ಅಧಿಕಾರಿಗಳಿಗೆ ಗುರುವಾರ ಎಚ್ಚರಿಕೆ ನೀಡಿದರು.

ಬೆಳಗಾವಿ ಜಿಲ್ಲೆಯ ಅಥಣಿ ಪಟ್ಟಣದ ಜೋಡು ಕೆರೆ ಅಭಿವೃದ್ಧಿ ಹೆಸರಿನಲ್ಲಿ ಐತಿಹಾಸಿಕ ವ್ಯಕ್ತಿಗಳ ನಾಮಫಲಕಕ್ಕೆ ಕುತ್ತು ಬಂದಿದ್ದು. ಇಲ್ಲಿನ ಕೆರೆ ಅಭಿವೃದ್ಧಿ ಕಾಮಗಾರಿಯ ನೆಪವೊಡ್ಡಿ, ಅಥಣಿ ಪುರಸಭೆ ಅಧಿಕಾರಿಗಳು ರಾತ್ರೋರಾತ್ರಿ ಕಿತ್ತೂರು ರಾಣಿ ಚೆನ್ನಮ್ಮ ವೃತ್ತದ ಬೋರ್ಡ್ ಅನ್ನು ತೆರವುಗೊಳಿಸಿದ್ದಾರೆ ಎಂಬ ಆರೋಪ ಕೇಳಿಬಂದಿದೆ.
ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಭೇಟಿ ನೀಡಿದ ಕೂಡಲಸಂಗಮ ಪಂಚಮಸಾಲಿ ಪೀಠದ ಜಗದ್ಗುರು ಶ್ರೀ ಬಸವ ಜಯಮೃತ್ಯುಂಜಯ ಸ್ವಾಮೀಜಿ ಅವರು, ಪುರಸಭೆ ಮುಖ್ಯಾಧಿಕಾರಿ ಅಶೋಕ್ ಗುಡಿಮನಿ ಅವರ ವರ್ತನೆಗೆ ತೀವ್ರ ಆಕ್ರೋಶ ವ್ಯಕ್ತಪಡಿಸಿದರು.
”ಕಿತ್ತೂರು ರಾಣಿ ಚೆನ್ನಮ್ಮ ನಾಡಿನ ಹೆ್ಮಮೆ. ಅಭಿವೃದ್ಧಿ ಕೆಲಸಗಳಿಗೆ ನಮ್ಮ ವಿರೋಧವಿಲ್ಲ, ಆದರೆ ಅಭಿವೃದ್ಧಿಯ ಹೆಸರಿನಲ್ಲಿ ಮಹಾನ್ ವ್ಯಕ್ತಿಗಳ ಹೆಸರಿನ ಬೋರ್ಡ್ಗಳನ್ನು ಏಕಾಏಕಿ ತೆರವು ಮಾಡುವುದು ಸರಿಯಲ್ಲ. ಇದು ಸಮಾಜದ ಭಾವನೆಗಳಿಗೆ ಧಕ್ಕೆ ತಂದಿದೆ,” ಎಂದು ಶ್ರೀಗಳು ಅಸಮಾಧಾನ ಹೊರಹಾಕಿದರು.
ಅಲ್ಲದೆ, “ತೆರವುಗೊಳಿಸಲಾದ ನಾಮಫಲಕವನ್ನು ಮುಂದಿನ 24 ಗಂಟೆಯ ಒಳಗಾಗಿ ಗೌರವಯುತವಾಗಿ ಯಥಾಸ್ಥಿತಿಯಲ್ಲಿ ಮರುಸ್ಥಾಪಿಸಬೇಕು. ತಪ್ಪಿದಲ್ಲಿ ಸಮಾಜದ ವತಿಯಿಂದ ಉಗ್ರ ಹೋರಾಟವನ್ನು ಎದುರಿಸಬೇಕಾಗುತ್ತದೆ,” ಎಂದು ಎಚ್ಚರಿಸಿದ್ದರು.



