ಬೆಳಗಾವಿ ಜಿಲ್ಲೆಯ ರಾಮದುರ್ಗ ಪಟ್ಟಣದಲ್ಲಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಿಂದ 33 ಕೋಟಿ ರೂ. ವೆಚ್ಚದಲ್ಲಿ ನಿರ್ಮಾಣಗೊಳ್ಳುವ 100 ಹಾಸಿಗೆಗಳ ತಾಲೂಕು ಸಾರ್ವಜನಿಕ ಆಸ್ಪತ್ರೆಯ ಕಾಮಗಾರಿಗೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಸಚಿವರಾದ ದಿನೇಶ್ ಗುಂಡೂರಾವ್ ಅವರು ಶಂಕುಸ್ಥಾಪನೆ ನೆರವೇರಿಸಿದರು.
ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಸ್ಥಳೀಯ ಶಾಸಕ ಅಶೋಕ ಪಟ್ಟಣ ಅವರ ನಿರಂತರ ಪ್ರಯತ್ನದಿಂದ ಈ ಆಧುನಿಕ ಆಸ್ಪತ್ರೆ ಮಂಜೂರಾಗಿದೆ ಎಂದು ಹೇಳಿದರು. ವಿದ್ಯಾರ್ಥಿ ಘಟಕದಿಂದ ರಾಜಕೀಯ ಜೀವನ ಆರಂಭಿಸಿ ದೀರ್ಘ ಅನುಭವ ಹೊಂದಿರುವ ಅವರು ಕ್ಷೇತ್ರದ ಅಭಿವೃದ್ಧಿಗೆ ವಿಶೇಷ ಕಾಳಜಿ ವಹಿಸುತ್ತಿದ್ದಾರೆ.
ಮುಖ್ಯಮಂತ್ರಿಗಳೊಂದಿಗೆ ಸಮನ್ವಯ ಹೊಂದಿರುವುದರಿಂದ ಅನೇಕ ಅಭಿವೃದ್ಧಿ ಕಾಮಗಾರಿಗಳನ್ನು ಕ್ಷೇತ್ರಕ್ಕೆ ತರಲು ಸಾಧ್ಯವಾಗಿದೆ ಎಂದು ಶ್ಲಾಘಿಸಿದರು.
ವಿರೋಧ ಪಕ್ಷಗಳು ಸರ್ಕಾರದ ಬಳಿ ಹಣವಿಲ್ಲ ಎಂದು ಅಪಪ್ರಚಾರ ಮಾಡುತ್ತಿವೆ ಎಂದು ಟೀಕಿಸಿದ ಸಚಿವರು, ಸರ್ಕಾರವು ಜನರಿಗೆ 55 ಸಾವಿರ ಕೋಟಿ ರೂ. ಅನುದಾನ ನೀಡಿದ್ದು, ಜನಪರ ಯೋಜನೆಗಳನ್ನು ನೇರವಾಗಿ ಜನರಿಗೆ ತಲುಪಿಸುವ ಕೆಲಸ ಮಾಡುತ್ತಿದೆ ಎಂದು ಹೇಳಿದರು.
ಜಿಲ್ಲೆಯಲ್ಲಿ ಒಂದೇ ದಿನ ಮೂರು ಆಸ್ಪತ್ರೆಗಳಿಗೆ ಶಂಕುಸ್ಥಾಪನೆ ಮಾಡಲಾಗಿದೆ. ಬೈಲಹೊಂಗಲದಲ್ಲಿ 25 ಕೋಟಿ ರೂ. ವೆಚ್ಚದ ತೀವ್ರ ನಿಗಾ ಘಟಕದ ಆಸ್ಪತ್ರೆ, ಸವದತ್ತಿಯಲ್ಲಿ 100 ಹಾಸಿಗೆಗಳ ಆಸ್ಪತ್ರೆ, ರಾಮದುರ್ಗದಲ್ಲಿ 33 ಕೋಟಿ ರೂ.
ವೆಚ್ಚದ ತಾಲೂಕು ಆಸ್ಪತ್ರೆ ಹಾಗೂ ಕಿತ್ತೂರಿನಲ್ಲಿ 33 ಕೋಟಿ ರೂ. ವೆಚ್ಚದ 100 ಹಾಸಿಗೆಗಳ ಆಸ್ಪತ್ರೆ ಕಾಮಗಾರಿ ಆರಂಭಗೊಂಡಿದೆ. ಖಾನಾಪುರದಲ್ಲಿ 100 ಹಾಸಿಗೆಗಳ ಆಸ್ಪತ್ರೆ, ಅಥಣಿಯಲ್ಲಿ ಎಂಸಿಎಚ್ ಆಸ್ಪತ್ರೆ ಕಾಮಗಾರಿ ನಡೆಯುತ್ತಿದ್ದು, ಗೋಕಾಕನಲ್ಲಿ 100 ಹಾಸಿಗೆಗಳ ಆಸ್ಪತ್ರೆ ನಿರ್ಮಾಣಕ್ಕೆ ಅನುಮೋದನೆ ದೊರೆತಿದೆ. ಒಟ್ಟಾರೆ ಬೆಳಗಾವಿ ಜಿಲ್ಲೆಗೆ ಆರೋಗ್ಯ ಇಲಾಖೆಯಿಂದ 330 ಕೋಟಿ ರೂ. ಅನುದಾನ ನೀಡಲಾಗಿದೆ ಎಂದು ತಿಳಿಸಿದರು.
ಹಿಂದಿನ ಸರ್ಕಾರದಲ್ಲಿ ಇಷ್ಟೊಂದು ಕಾಮಗಾರಿಗಳು ನಡೆದಿಲ್ಲ ಎಂದು ಟೀಕಿಸಿದ ಅವರು, ನಮ್ಮ ಸರ್ಕಾರ ಅಧಿಕಾರಕ್ಕೆ ಬಂದ ಬಳಿಕ 500 ಹೊಸ ಬಸ್ಗಳನ್ನು ಒದಗಿಸಲಾಗಿದೆ ಎಂದು ಹೇಳಿದರು.
ಬಾಣಂತಿಯರ ಸಾವನ್ನು ಶೂನ್ಯಕ್ಕೆ ಇಳಿಸಲು ವಿಶೇಷ ಅಭಿಯಾನ ಆರಂಭಿಸಲಾಗಿದೆ. 100 ಕೋಟಿ ಜನರ ತಪಾಸಣೆ ನಡೆಸಲಾಗಿದೆ. ಡಯಾಲಿಸಿಸ್ ಸೇವೆಗಳನ್ನು ಜಾರಿಗೆ ತರಲಾಗಿದೆ. ಆಶಾಕಿರಣ ಯೆ ಗೆ ಸೇರಿದಂತೆ ಹಲವು ಆರೋಗ್ಯ ಕಾರ್ಯಕ್ರಮಗಳನ್ನು ಯಶಸ್ವಿಯಾಗಿ ಜಾರಿಗೊಳಿಸಲಾಗಿದೆ ಎಂದು ವಿವರಿಸಿದರು.
ಈ ಸಂದರ್ಭದಲ್ಲಿ ಶಾಸಕ ಅಶೋಕ್ ಪಟ್ಟಣವರು ಮಾತನಾಡಿ, 33 ಕೋಟಿ ರೂ. ವೆಚ್ಚದ ಈ ಆಸ್ಪತ್ರೆಯಿಂದ ಉತ್ತಮ ಮೂಲಸೌಕರ್ಯ ಮತ್ತು ಗುಣಮಟ್ಟದ ಚಿಕಿತ್ಸೆ ಸ್ಥಳೀಯರಿಗೆ ಸಮೀಪದಲ್ಲೇ ಲಭ್ಯವಾಗಲಿದೆ. ಗ್ರಾಮೀಣ ಜನರಿಗೆ ತುರ್ತು ಸಂದರ್ಭಗಳಲ್ಲಿ ದೂರ ಪ್ರಯಾಣಿಸುವ ಅವಶ್ಯಕತೆ ಕಡಿಮೆಯಾಗಲಿದೆ ಎಂದು ಹೇಳಿದರು.



