ಎಸ್ಐಆರ್; ಬಿಡದಿ ಮನೆಯಲ್ಲಿ ಅಧಿಕಾರಿಗಳಿಗೆ ದಾಖಲೆ, ಮಾಹಿತಿ ಕೊಟ್ಟ ಹೆಚ್.ಡಿ.ಕುಮಾರಸ್ವಾಮಿ
ಕುಟುಂಬದೊಂದಿಗೆ ಎಸ್ಐಆರ್ ಪ್ರಕ್ರಿಯೆಯಲ್ಲಿ ಭಾಗಿಯಾದ ಕೇಂದ್ರ ಸಚಿವರು
ಮತಪಟ್ಟಿ ಪರಿಷ್ಕರಣೆ ದುರ್ಬಳಕೆಗೆ ಜಿಲ್ಲಾಧಿಕಾರಿಗಳೇ ಹೊಣೆ; ತಪ್ಪಿತಸ್ಥ ಅಧಿಕಾರಿಗಳು ವಿರುದ್ಧ ಕ್ರಮಕ್ಕೆ ಆಗ್ರಹ
ಅಕ್ರಮ ನಡೆಯುತ್ತಿದ್ದರೂ ಸೈಲೆಂಟ್ ಆಗಿರುವ ಗೃಹ ಸಚಿವ ಪ್ರಿಯಾಂಕ ಖರ್ಗೆ ವಿರುದ್ಧ ಕಿಡಿ
ಬಿಡದಿ | ರಾಮನಗರ
ರಾಜ್ಯಾದ್ಯಂತ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಪರಿಷ್ಕರಣೆಯ ಭಾಗವಾಗಿ ಕೇಂದ್ರ ಸಚಿವರಾದ ಹೆಚ್.ಡಿ. ಕುಮಾರಸ್ವಾಮಿ ಅವರು ಬಿಡದಿಯ ಕೇತಗಾನಹಳ್ಳಿಯ ತಮ್ಮ ತೋಟದ ಮನೆಯಲ್ಲಿ ಬೂತ್ ಮಟ್ಟದ ಅಧಿಕಾರಿಗಳಿಗೆ ಸಮೀಕ್ಷೆಗೆ ಅಗತ್ಯವಿರುವ ದಾಖಲೆ ಮತ್ತು ಮಾಹಿತಿಯನ್ನು ನೀಡಿದರು.
ಸಚಿವರೊಂದಿಗೆ ಅವರ ಧರ್ಮಪತ್ನಿ ಶ್ರೀಮತಿ ಅನಿತಾ ಕುಮಾರಸ್ವಾಮಿ ಅವರು, ಪುತ್ರ ಹಾಗೂ ಜೆಡಿಎಸ್ ಯುವ ಘಟಕದ ಅಧ್ಯಕ್ಷರಾದ ನಿಖಿಲ್ ಕುಮಾರಸ್ವಾಮಿ ಅವರು ಹಾಗೂ ನಿಖಿಲ್ ಅವರ ಧರ್ಮಪತ್ನಿ ಶ್ರೀಮತಿ ರೇವತಿ ನಿಖಿಲ್ ಅವರು ಕೂಡ ಈ ಪ್ರಕ್ರಿಯೆಯಲ್ಲಿ ಭಾಗಿಯಾಗಿ ಅಧ ಮಾಡಿಕೊಂಡಿದ್ದಾರೆ ಅಧಿಕಾರಿಗಳಿಗೆ ಅಗತ್ಯ ದಾಖಲೆ ಮತ್ತು ಮಾಹಿತಿಯನ್ನು ನೀಡಿದರು.
ಈ ಸಂದರ್ಭದಲ್ಲಿ ಮಾತನಾಡಿದ ಕೇಂದ್ರ ಸಚಿವರು; ಕೇತಗಾನಹಳ್ಳಿಯ ನನ್ನ ತೋಟದ ಮನೆಯಲ್ಲಿ ಮತದಾರರ ಪಟ್ಟಿ ತೀವ್ರ ಪರಿಷ್ಕರಣೆಯಲ್ಲಿ (SIR) ಪ್ರಕ್ರಿಯೆಯಲ್ಲಿ ಕುಟುಂಬದೊಂದಿಗೆ ಪಾಲ್ಗೊಂಡು ಬಿಎಲ್ಓಗಳಿಗೆ ಅಗತ್ಯ ದಾಖಲೆಗಳನ್ನು ಒದಗಿಸಿ ಮಾಹಿತಿ ನೀಡಲಾಯಿತು. ಈ ಪರಿಷ್ಕರಣೆ ಪಾರದರ್ಶಕವಾಗಿರಬೇಕು ಹಾಗೂ ನೈಜ ಮತದಾರರೆಲ್ಲರೂ ಮತದಾರರ ಪಟ್ಟಿಯಲ್ಲಿ ಉಳಿಯಲೇಬೇಕು ಎಂಬ ಆಶಯದೊಂದಿಗೆ ಈ ಪ್ರಕ್ರಿಯೆಯಲ್ಲಿ ಭಾಗವಹಿಸಿದೆ. ನಾಡಿನ ಪ್ರತಿಯೊಬ್ಬರು SIR ಪ್ರಕ್ರಿಯೆಯಲ್ಲಿ ನಿಯಮಾನುಸಾರವಾಗಿ ತಪ್ಪದೇ ಪಾಲ್ಗೊಳ್ಳಬೇಕು. ಆ ಮೂಲಕ ಕೇಂದ್ರ ಚುನಾವಣಾ ಆಯೋಗ ಕೈಗೊಂಡಿರುವ ಸಮೀಕ್ಷೆಯನ್ನು ಯಶಸ್ವಿಗೊಳಿಸಬೇಕು ಎಂದು ಕೋರುತ್ತೇನೆ ಎಂದರು.
ರಾಜ್ಯ ಸರ್ಕಾರದ ವಿರುದ್ಧ ಹೆಚ್ಡಿಕೆ ವಾಗ್ದಾಳಿ:
ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷ ಅಧಿಕಾರದಲ್ಲಿದೆ. ಅಕ್ರಮ ಮತಗಳನ್ನು ಉಳಿಸಿಕೊಳ್ಳಲು ಹರಸಹಾಸ ಮಾಡುತ್ತಿದೆ. ಎಲ್ಲಾ ನಿಯಮಗಳನ್ನು ಗಾಳಿಗೆ ತೂರಿ, ಕೇಂದ್ರ ಚುನಾವಣಾ ಆಯೋಗದ ಆಶಯಗಳಿಗೆ ಎಳ್ಳುನೀರು ಬಿಟ್ಟು ರಾಜ್ಯ ಸರ್ಕಾರವು ನೇರವಾಗಿ ಅಕ್ರಮ ಮತ್ತು ಗಳನ್ನು ಉಳಿಸಿಕೊಳ್ಳಲು ಕುಮ್ಮಕ್ಕು ನೀಡುತ್ತಿದೆ ಎಂದು ಕೇಂದ್ರ ಸಚಿವರು ನೇರ ಆರೋಪ ಮಾಡಿದರು.
ಅನೇಕ ಜಿಲ್ಲೆಗಳ ಜಿಲ್ಲಾಧಿಕಾರಿಗಳೇ ಎಸ್ಐಆರ್ ದುರ್ಬಳಕೆಯಲ್ಲಿ ಭಾಗಿಯಾಗಿದ್ದಾರೆ ಎಂದು ಗಂಭೀರ ಆರೋಪ ಮಾಡಿದ ಕೇಂದ್ರ ಸಚಿವರು; ಈ ಕೂಡಲೇ ಕೇಂದ್ರ ಚುನಾವಣಾ ಆಯೋಗವು ಮಧ್ಯಪ್ರವೇಶ ಮಾಡಬೇಕು. ಪಶ್ಚಿಮ ಬಂಗಾಳದಲ್ಲಿ ಮಾಡಿದಂತೆಯೇ ರಾಜ್ಯದಲ್ಲಿಯೂ ಎಸ್ಐಆರ್ ಉಸ್ತುವಾರಿಗೆ ಹೊರ ರಾಜ್ಯದ ಅಧಿಕಾರಿಯನ್ನು ನೇಮಕ ಮಾಡಬೇಕು. ತಪ್ಪು ಮಾಡಿದ ಜಿಲ್ಲಾಧಿಕಾರಿಗಳ ವಿರುದ್ಧ ಕಠಿಣ ಕ್ರಮ ಜರುಗಿಸಬೇಕು ಎಂದು ಸಚಿವರು ಒತ್ತಾಯ ಮಾಡಿದರು.
ಇಡೀ ಪ್ರಕ್ರಿಯೆಯನ್ನು ಪಾರದರ್ಶಕವಾಗಿ ಮತ್ತು ಚುನಾವಣೆ ಆಯೋಗದ ನಿಯಮಗಳಿಗೆ ಅನುಸಾರವಾಗಿ ನಡೆಸಬೇಕಾದ ಜಿಲ್ಲಾಧಿಕಾರಿಗಳ ವೈಫಲ್ಯ ಎದ್ದು ಕಾಣುತ್ತಿದೆ. ಅನೇಕರು ಸರ್ಕಾರದ ಮರ್ಜಿಗೆ ತಕ್ಕಂತೆ ಕೆಲಸ ಮಾಡುತ್ತಿದ್ದಾರೆ ಎಂದು ನೇರ ಆರೋಪ ಮಾಡಿದರು ಕೇಂದ್ರ ಸಚಿವರು.
ಅಲ್ಲದೆ ಈವರೆಗೂ ನಡೆಸಲಾಗಿರುವ ಸಮೀಕ್ಷೆಯನ್ನು ರದ್ದುಗೊಳಿಸಿ ಹೊಸದಾಗಿ ಸಮೀಕ್ಷೆಯನ್ನು ನಡೆಸಬೇಕು ಎಂದು ಆಗ್ರಹಪಡಿಸಿದ ಕೇಂದ್ರ ಸಚಿವರು; ಈ ಬಗ್ಗೆ ಕೇಂದ್ರ ಚುನಾವಣಾ ಆಯುಕ್ತರಿಗೆ ಜೆಡಿಎಸ್ ಮತ್ತು ಬಿಜೆಪಿ ನಾಯಕರು ಸೇರಿ ದಾಖಲೆ ಸಮೇತ ದೂರು ನೀಡುತ್ತೇವೆ ಎಂದು ತಿಳಿಸಿದರು.
ಎಸ್ ಐಆರ್ ದುರ್ಬಳಕೆ ಬಗ್ಗೆ ಜಾಣ ಮೌನ ವಹಿಸಿರುವ ಗೃಹ ಸಚಿವ ಪ್ರಿಯಾಂಕ್ ಖರ್ಗೆ ಅವರನ್ನು ತೀವ್ರ ತರಾಟೆಗೆ ತೆಗೆದುಕೊಂಡ ಸಚಿವ ಕುಮಾರಸ್ವಾಮಿ ಅವರು; ಪ್ರತಿ ವಿಷಯಕ್ಕೂ ಕಾಲು ಕೆರೆದು ಜಗಳಕ್ಕೆ ಬರುವ ಹಾಗೂ ಎಲ್ಲಕ್ಕೂ ಸ್ಟೇಟ್ ಮೆಂಟ್ ಮಾಡುವ ಗೃಹ ಸಚಿವರು ಎಸ್ ಐಆರ್ ದುರ್ಬಳಕೆ ಬಗ್ಗೆ ಮಾತನಾಡುತ್ತಲೇ ಇಲ್ಲ. ಪ್ರತಿ ವಿಷಯವನ್ನು ಕುಟುಕಿ ಕುಟುಕಿ ನೋಡುವ ಅವರು ಈ ಬಗ್ಗೆ ಬಾಯಿ ಬಿಡುತ್ತಿಲ್ಲ. ನಿರಂತರವಾಗಿ ಅಕ್ರಮಗಳು ನಡೆಯುತ್ತಿದ್ದರೂ ರಾಜ್ಯ ಸರ್ಕಾರ ಮೌನವಾಗಿದೆ ಎಂದು ಸಚಿವ ಕುಮಾರಸ್ವಾಮಿ ಅವರು ಆರೋಪಿಸಿದರು.
ಬಿಡದಿ ಟೌನ್ಶಿಪ್ ಹೋರಾಟ ನಿಲ್ಲದು:
ರೈತರ ಮುಂದೆ ಚರ್ಚೆ ಮಾಡೋಣ ಎಂದರೆ ಮುಖ್ಯಮಂತ್ರಿ ಬರಲಿಲ್ಲ. ಆದರೆ ಇನ್ನೊಂದು ಕಡೆ ಟೆಂಟ್ ಹಾಕಿಸಿ ದೊಡ್ಡ ಡ್ರಾಮ ನಡೆಸಿದರು ಎಂದು ಕುಮಾರಸ್ವಾಮಿ ಅವರು ದೂರಿದರು.
ನೊಂದ ರೈತರ ಪರವಾಗಿ ನಾನು ಕಾನೂನು ಹೋರಾಟ ನಡೆಸುತ್ತೇನೆ. ನನ್ನ ಕೊನೆ ಉಸಿರು ಇರುವ ತನಕ ರೈತರ ಜತೆ ಇರುತ್ತೇನೆ ಎಂದ ಸಚಿವರು; ಉಪನಗರ ಯೋಜನೆ ಭೂಮಿಯನ್ನೇ ಹೊಂದಿರದ ಕೆಲವರು ಅವರ ಟೆಂಟ್ ನಲ್ಲಿ ಕೂತಿದ್ದರು ಎಂದು ಲೇವಡಿ ಮಾಡಿದರು.
ಈ ಸಂದರ್ಭದಲ್ಲಿ ಮಾಗಡಿ ವಿಧಾನಸಭೆ ಕ್ಷೇತ್ರದ ಮಾಜಿ ಶಾಸಕ ಎ.ಮಂಜುನಾಥ್ ಉಪಸ್ಥಿತರಿದ್ದರು.



