ಮಹಾರಾಷ್ಟ್ರದಲ್ಲಿ ವರುಣನ ಅಬ್ಬರ: ಕೃಷ್ಣಾ ಒಳಹರಿವು 1 ಲಕ್ಷ ಕ್ಯೂಸೆಕ್ಗೆ ಏರಿಕೆ, 9 ಸೇತುವೆಗಳು ಮುಳುಗಡೆ!
ಮಹಾರಾಷ್ಟ್ರದ ಪಶ್ಚಿಮ ಘಟ್ಟ ಪ್ರದೇಶದಲ್ಲಿ ವರುಣನ ಆರ್ಭಟ ಮುಂದುವರಿದಿದೆ. ಇದರ ಬೆನ್ನಲ್ಲೇ ಕರ್ನಾಟಕ-ಮಹಾರಾಷ್ಟ್ರ ಗಡಿಭಾಗ ಹಾಗೂ ಬೆಳಗಾವಿ ಜಿಲ್ಲೆಯ ಕೃಷ್ಣಾ ನದಿ ಪಾತ್ರದಲ್ಲಿ ಪ್ರವಾಹದ ಭೀತಿ ಎದುರಾಗಿದೆ. ಕೇವಲ ನಾಲ್ಕು ದಿನಗಳ ಹಿಂದೆಯಷ್ಟೇ ಸಂಪೂರ್ಣ ಬತ್ತಿ ಹೋಗಿದ್ದ ಕೃಷ್ಣಾ ನದಿಗೆ ಈಗ ಬರೋಬ್ಬರಿ 1 ಲಕ್ಷ ಕ್ಯೂಸೆಕ್ ನೀರು ಹರಿದು ಬರುತ್ತಿದೆ. ಇತ್ತ ಕೃಷ್ಣೆಯ ಉಪನದಿಯಾದ ಪಂಚಗಂಗಾ ನದಿ ಉಕ್ಕಿ ಹರಿಯುತ್ತಿದ್ದು, ನೂರಾರು ಹೆಕ್ಟೇರ್ ಬೆಳೆ ಜಲಾವೃತಗೊಂಡಿದೆ. ಪ್ರಸಿದ್ಧ ದತ್ತ ಮಂದಿರ ಕೂಡ ಭಾಗಶಃ ಮುಳುಗಡೆಯಾಗಿದೆ. ಈ ಕುರಿತು ಒಂದು ಕಂಪ್ಲೀಟ್ ರಿಪೋರ್ಟ್ ಇಲ್ಲಿದೆ.
ಕೃಷ್ಣಾ ತೀರದಲ್ಲಿ ಜಲಪ್ರಳಯ!
ಮಹಾರಾಷ್ಟ್ರದ ಪಶ್ಚಿಮ ಘಟ್ಟದಲ್ಲಿ ಸುರಿಯುತ್ತಿರುವ ಮುಂಗಾರು ಮಳೆಗೆ ನದಿಗಳು ಮೈದುಂಬಿ ಹರಿಯುತ್ತಿವೆ. ಕೃಷ್ಣಾ ನದಿಯ ಪ್ರಮುಖ ಉಪನದಿಯಾದ ಪಂಚಗಂಗಾ ನದಿ ತನ್ನ ಒಡಲನ್ನು ಮೀರಿ ಉಕ್ಕಿ ಹರಿಯುತ್ತಿದೆ. ಬೆಳಗಾವಿ ಭಾಗದಲ್ಲಿ ನದಿಯ ನೀರು ನುಗ್ಗಿದ್ದರಿಂದ ನೂರಾರು ಹೆಕ್ಟೇರ್ ಪ್ರದೇಶದಲ್ಲಿನ ಬೆಳೆಗಳು ಸಂಪೂರ್ಣ ಜಲಾವೃತಗೊಂಡಿವೆ. ಹಲವು ಗ್ರಾಮೀಣ ಭಾಗದ ಊರುಗಳು ಕೆರೆಯಂತಾಗಿದ್ದು, ಜನರು ಆತಂಕದಲ್ಲಿದ್ದಾರೆ. ಪಂಚಗಂಗಾ ನದಿಯ ಈ ರೌದ್ರಾವತಾರದ ದೃಶ್ಯಗಳು ಡ್ರೋನ್ ಕ್ಯಾಮರಾದಲ್ಲಿ ಸೆರೆಯಾಗಿವೆ. ಈ ನೀರು ನೇರವಾಗಿ ಕೃಷ್ಣಾ ನದಿಯನ್ನು ಸೇರುತ್ತಿದ್ದು, ಕಲ್ಲೋಳ ಬ್ಯಾರೇಜ್ಗೆ ಭಾರಿ ಪ್ರಮಾಣದ ನೀರು ಹರಿದುಬರುತ್ತಿದೆ.
ಇತ್ತ ಮಹಾರಾಷ್ಟ್ರದ ಕೊಲ್ಲಾಪುರ ಜಿಲ್ಲೆಯ ಶಿರೋಳ ತಾಲೂಕಿನ ಪ್ರಸಿದ್ಧ ಯಾತ್ರಾ ಸ್ಥಳವಾದ ನರಸಿಂಹವಾಡಿ ದತ್ತ ಮಂದಿರಕ್ಕೆ ಪ್ರವಾಹದ ನೀರು ನುಗ್ಗಿದೆ. ಕೃಷ್ಣಾ ಮತ್ತು ಪಂಚಗಂಗಾ ನದಿಗಳು ಸಂಗಮವಾಗುವ ಈ ಪುಣ್ಯಕ್ಷೇತ್ರದಲ್ಲಿ ದತ್ತ ಮಂದಿರ ಭಾಗಶಃ ಮುಳುಗಡೆಯಾಗಿದೆ. ಆದರೂ ಭಕ್ತರು ನೀರಿನಲ್ಲೇ ನಿಂತು ದೇವರ ದರ್ಶನ ಪಡೆಯುತ್ತಿದ್ದಾರೆ. ಪಶ್ಚಿಮ ಘಟ್ಟದಲ್ಲಿ ಮಳೆ ಹೀಗೆಯೇ ಮುಂದುವರಿದರೆ, ಇಡೀ ದೇಗುಲ ಸಂಪೂರ್ಣವಾಗಿ ಮುಳುಗಡೆಯಾಗುವ ಸಾಧ್ಯತೆ ದಟ್ಟವಾಗಿದೆ.
ಮುಳುಗಡೆಯಾಗಿದ ಕೆಳಹಂತದ ಸೇತುವೆಗಳು, ಬ್ಯಾರಿಕೇಡ್ ಹಾಕಿದ ಪೊಲೀಸರು
ಕಳೆದ ನಾಲ್ಕು ದಿನಗಳ ಹಿಂದೆಯಷ್ಟೇ ಹನಿ ನೀರಿಲ್ಲದೆ ಬತ್ತಿಹೋಗಿದ್ದ ಕೃಷ್ಣಾ ನದಿಗೆ ಈಗ ದಿಢೀರ್ ಜೀವಕಳೆ ಬಂದಿದೆ. ನಿನ್ನೆ 80 ಸಾವಿರ ಕ್ಯೂಸೆಕ್ ಇದ್ದ ಒಳಹರಿವು, ಇಂದು ಬರೋಬ್ಬರಿ 1 ಲಕ್ಷ ಕ್ಯೂಸೆಕ್ಗೆ ಏರಿಕೆಯಾಗಿದೆ. ಪರಿಣಾಮ ಚಿಕ್ಕೋಡಿ ವ್ಯಾಪ್ತಿಯಲ್ಲಿ ಒಟ್ಟು 9 ಕೆಳಹಂತದ ಸೇತುವೆಗಳು ಜಲಾವೃತಗೊಂಡಿವೆ. ನಿಪ್ಪಾಣಿ ತಾಲೂಕಿನ 5 ಸೇತುವೆಗಳು, ಚಿಕ್ಕೋಡಿ ತಾಲೂಕಿನ 4 ಹಾಗೂ ಕಾಗವಾಡ ತಾಲೂಕಿನ 1 ಸೇತುವೆ ಸಂಪೂರ್ಣ ಬಂದ್ ಆಗಿದ್ದು, ಸಾರ್ವಜನಿಕರು ಪರ್ಯಾಯ ಮಾರ್ಗಗಳ ಮೂಲಕ ಸಂಚರಿಸುತ್ತಿದ್ದಾರೆ.
ಗಂಟೆಯಿಂದ ಗಂಟೆಗೆ ಕೃಷ್ಣಾ, ದೂದಗಂಗಾ ಹಾಗೂ ಹಿರಣ್ಯಕೇಶಿ ನದಿಗಳ ನೀರಿನ ಮಟ್ಟ ಗಣನೀಯವಾಗಿ ಹೆಚ್ಚಾಗುತ್ತಿದೆ. ಪ್ರವಾಹದ ಮುನ್ನೆಚ್ಚರಿಕೆಯಾಗಿ ನದಿ ತೀರದ ಜನರಿಗೆ ಜಿಲ್ಲಾಡಳಿತ ಕಟ್ಟುನಿಟ್ಟಿನ ಎಚ್ಚರಿಕೆ ನೀಡಿದೆ. ಯಾವುದೇ ಕಾರಣಕ್ಕೂ ಯಾರೂ ನದಿಗೆ ಇಳಿಯಬಾರದು ಎಂದು ಸೂಚನೆ ನೀಡಲಾಗಿದೆ.



