ಸರ್ಕಾರಿ ಅನುದಾನವಿಲ್ಲದೆ ಸ್ಮಾರ್ಟ್ ಬೋರ್ಡ್ ಅಳವಡಿಕೆ: ಮುದುಕವಿ ಸರ್ಕಾರಿ ಪ್ರೌಢಶಾಲೆಯಲ್ಲಿ ಡಿಜಿಟಲ್ ಬೋರ್ಡ್ ಉದ್ಘಾಟನೆ ಹಾಗೂ ಅಭಿನಂದನಾ ಸಮಾರಂಭ
ರಾಮದುರ್ಗ: ತಾಲೂಕಿನ ಮುದುಕವಿ ಗ್ರಾಮದ ಸರ್ಕಾರಿ ಪ್ರೌಢಶಾಲೆಯಲ್ಲಿ ಸರ್ಕಾರದ ಯಾವುದೇ ಅನುದಾನವಿಲ್ಲದೆ ಶಾಲೆಯ ಶಿಕ್ಷಕರು, ಊರಿನ ಗಣ್ಯರು ಹಾಗೂ ಹಳೆಯ ವಿದ್ಯಾರ್ಥಿಗಳ ಸಹಕಾರದಿಂದ ಅಳವಡಿಸಲಾದ ಸ್ಮಾರ್ಟ್ ಡಿಜಿಟಲ್ ಬೋರ್ಡ್ನ್ನು ಉದ್ಘಾಟಿಸಿ, ಸಹಕರಿಸಿದ ಎಲ್ಲರನ್ನು ಅಭಿನಂದಿಸುವ ಸಮಾರಂಭವು ಅರ್ಥಪೂರ್ಣವಾಗಿ ನಡೆಯಿತು.
ಕಾರ್ಯಕ್ರಮವನ್ನು ರಾಮದುರ್ಗ ಕ್ಷೇತ್ರ ಶಿಕ್ಷಣಾಧಿಕಾರಿಗಳಾದ ಶ್ರೀ ಸುರೇಂದ್ರ ಕಾಂಬಳೆ ಉದ್ಘಾಟಿಸಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಾಲೆಯ ಪ್ರಭಾರಿ ಮುಖ್ಯೋಪಾಧ್ಯಾಯರಾದ ಶ್ರೀ ಎಸ್.ಆರ್. ಪಮ್ಮಾರ್ ವಹಿಸಿದ್ದರು.
ಮುಖ್ಯ ಅತಿಥಿಗಳಾಗಿ ಶ್ರೀ ರಾಜಶೇಖರ್ ಹಿರೇಮಠ, ಸಹಾಯಕ ನಿರ್ದೇಶಕರು ಹಾಗೂ ಪಿಎಂ ಪೋಷಣ ಅಭಿಯಾನ, ಭಾಗವಹಿಸಿ ಡಿಜಿಟಲ್ ಶಿಕ್ಷಣದ ಮಹತ್ವವನ್ನು ವಿವರಿಸಿದರು. ಅತಿಥಿಗಳಾಗಿ ಗ್ರಾಮ ಪಂಚಾಯತ್ ಅಧ್ಯಕ್ಷರಾದ ಶ್ರೀ ವಹಿದ್ ಖಾಜಿ, ನ್ಯಾಯವಾದಿ ಶ್ರೀ ಬಿ.ಎಂ. ದಳವಾಯಿ, ಊರಿನ ಗಣ್ಯರಾದ ಶ್ರೀ ಶಿವಾನಂದ ಮಠಪತಿ ನಾಗರಾಜ ದಳವಾಯಿ ಉಮೇಶ ಹಲಗಿ ಹಾಗೂ ಶಿಕ್ಷಕರಾದ ಶ್ರೀ ಸುರೇಶ್ ಏಣಿ ಉಪಸ್ಥಿತರಿದ್ದರು.
ಈ ಸಂದರ್ಭದಲ್ಲಿ ಮಾತನಾಡಿದ ಗಣ್ಯರು, ಇಂದಿನ ಶಿಕ್ಷಣ ವ್ಯವಸ್ಥೆಯಲ್ಲಿ ಡಿಜಿಟಲ್ ಕಲಿಕೆಯ ಮಹತ್ವ ಹೆಚ್ಚುತ್ತಿದ್ದು, ಸ್ಮಾರ್ಟ್ ಬೋರ್ಡ್ಗಳಂತಹ ತಂತ್ರಜ್ಞಾನ ವಿದ್ಯಾರ್ಥಿಗಳ ಕಲಿಕೆಯನ್ನು ಇನ್ನಷ್ಟು ಪರಿಣಾಮಕಾರಿಯಾಗಿಸುತ್ತದೆ ಎಂದು ಅಭಿಪ್ರಾಯಪಟ್ಟರು. ಸರ್ಕಾರದ ಅನುದಾನಕ್ಕಾಗಿ ಕಾಯದೆ, ಸಮಾಜದ ಸಹಭಾಗಿತ್ವದ ಮೂಲಕ ಶಾಲೆಯ ಅಭಿವೃದ್ಧಿಗೆ ಮುಂದಾಗಿರುವ ಶಿಕ್ಷಕರು, ಹಳೆಯ ವಿದ್ಯಾರ್ಥಿಗಳು ಹಾಗೂ ಗ್ರಾಮಸ್ಥರ ಕಾರ್ಯ ಶ್ಲಾಘನೀಯವಾಗಿದೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.
ಶಾಲೆಯಲ್ಲಿ ಸ್ಮಾರ್ಟ್ ಬೋರ್ಡ್ ಅಳವಡಿಕೆಗೆ ಅಗತ್ಯವಿದ್ದ ಹಣವನ್ನು ಶಾಲೆಯ ಶಿಕ್ಷಕರು, ಊರಿನ ಗಣ್ಯರು ಹಾಗೂ ಹಳೆಯ ವಿದ್ಯಾರ್ಥಿಗಳು ಸ್ವಯಂಪ್ರೇರಿತವಾಗಿ ಸಂಗ್ರಹಿಸಿ, ವಿದ್ಯಾರ್ಥಿಗಳ ಉತ್ತಮ ವಿದ್ಯಾಭ್ಯಾಸಕ್ಕಾಗಿ ಈ ವ್ಯವಸ್ಥೆಯನ್ನು ಕಲ್ಪಿಸಿದ್ದಾರೆ. ಇದರಿಂದ ವಿದ್ಯಾರ್ಥಿಗಳು ಆಧುನಿಕ ತಂತ್ರಜ್ಞಾನದ ನೆರವಿನಿಂದ ಗುಣಮಟ್ಟದ ಶಿಕ್ಷಣ ಪಡೆಯಲು ಅನುಕೂಲವಾಗಲಿದೆ.
ಕಾರ್ಯಕ್ರಮದಲ್ಲಿ ಶಿಕ್ಷಣ ಇಲಾಖೆಯ ಸಿಬ್ಬಂದಿ, ಮುದುಕವಿ ಸರ್ಕಾರಿ ಪ್ರೌಢಶಾಲೆಯ ಎಲ್ಲಾ ಶಿಕ್ಷಕರು, ಗ್ರಾಮದ ಗುರುಹಿರಿಯರು, ಫ್ರೆಂಡ್ಸ್ ಕ್ಲಬ್ ಮುದುಕವಿ ಸದಸ್ಯರು ಹಾಗೂ ಶಾಲೆಯ ವಿದ್ಯಾರ್ಥಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿದ್ದರು.



