ಬೆಳಗಾವಿ ಜಿಲ್ಲಾಡಳಿತದಿಂದ ಸಿಗದ ನ್ಯಾಯ: ಕಲ್ಲು ಗಣಿಗಾರಿಕೆ ಸ್ಥಗಿತಗೊಳಿಸಲು ಮಹಿಳಾ ಆಯೋಗದ ಮೊರೆ ಹೋದ ಗಸ್ತಿ ಕುಟುಂಬ
ಅಥಣಿಗೆ ಆಗಮಿಸಿದ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ನಾಗಲಕ್ಷ್ಮಿ ಚೌದರಿ ಅವರಿಗೆ ಸ್ಥಳೀಯರಿಂದ ಮನವಿ ಸಲ್ಲಿಕೆ.
ಅಥಣಿ:ಕಲ್ಲು ಗಣಿಗಾರಿಕೆಯಿಂದ ಎದುರಾಗಿರುವ ಸಮಸ್ಯೆಗಳನ್ನು ಬಗೆಹರಿಸುವಲ್ಲಿ ಬೆಳಗಾವಿ ಜಿಲ್ಲಾಡಳಿತ ಸಂಪೂರ್ಣ ವಿಫಲವಾಗಿದೆ ಎಂದು ಆರೋಪಿಸಿ, ಗಸ್ತಿ ಕುಟುಂಬ ಹಾಗೂ ಸುತ್ತಮುತ್ತಲಿನ ನಿವಾಸಿಗಳು ರಾಜ್ಯ ಮಹಿಳಾ ಆಯೋಗದ ಮೊರೆ ಹೋಗಿದ್ದಾರೆ. ಪಟ್ಟಣಕ್ಕೆ ಆಗಮಿಸಿದ ಆಯೋಗದ ಅಧ್ಯಕ್ಷೆ ನಾಗಲಕ್ಷ್ಮಿ ಚೌದರಿ ಅವರನ್ನು ಭೇಟಿಯಾದ ಸ್ಥಳೀಯರು, ತಕ್ಷಣವೇ ಕಲ್ಲು ಗಣಿಗಾರಿಕೆಯನ್ನು ನಿಲ್ಲಿಸುವಂತೆ ಒತ್ತಾಯಿಸಿ ಮನವಿ ಸಲ್ಲಿಸಿದರು.
ಕಳೆದ ಹಲವು ದಿನಗಳಿಂದ ಕಲ್ಲು ಗಣಿಗಾರಿಕೆಯಿಂದಾಗಿ ಸ್ಥಳೀಯ ನಿವಾಸಿಗಳು ತೀವ್ರ ತೊಂದರೆ ಅನುಭವಿಸುತ್ತಿದ್ದಾರೆ. ಈ ಬಗ್ಗೆ ಜಿಲ್ಲಾಡಳಿತ ಹಾಗೂ ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದರೂ ಯಾವುದೇ ಪ್ರಯೋಜನವಾಗಿಲ್ಲ. ಅಧಿಕಾರಿಗಳ ನಿರ್ಲಕ್ಷ್ಯದಿಂದ ರೋಸಿಹೋಗಿದ್ದ ಗಸ್ತಿ ಕುಟುಂಬದವರು, ಮಹಿಳಾ ಆಯೋಗದ ಅಧ್ಯಕ್ಷರು ಅಥಣಿಗೆ ಆಗಮಿಸುತ್ತಿದ್ದಂತೆ ಭೇಟಿಯಾಗಿ ತಮ್ಮ ಅಳಲನ್ನು ತೋಡಿಕೊಂಡರು.
ಅವೈಜ್ಞಾನಿಕ ಕಲ್ಲು ಗಣಿಗಾರಿಕೆಯಿಂದಾಗಿ ಮನೆಗಳಿಗೆ ಹಾನಿಯಾಗುತ್ತಿದೆ. ಜೊತೆಗೆ ದೂಳು ಮತ್ತು ಭಾರಿ ಶಬ್ದ ಮಾಲಿನ್ಯದಿಂದಾಗಿ ದೈನಂದಿನ ಬದುಕಿಗೆ, ವೃದ್ಧರಿಗೆ ಹಾಗೂ ಮಕ್ಕಳ ಆರೋಗ್ಯದ ಮೇಲೆ ಗಂಭೀರ ಪರಿಣಾಮ ಬೀರುತ್ತಿದೆ ಎಂದು ಮನವಿಯಲ್ಲಿ ವಿವರಿಸಲಾಗಿದೆ. ಜನವಸತಿ ಪ್ರದೇಶದ ಸಮೀಪ ನಡೆಯುತ್ತಿರುವ ಈ ಗಣಿಗಾರಿಕೆಯನ್ನು ಶಾಶ್ವತವಾಗಿ ಸ್ಥಗಿತಗೊಳಿಸಿ, ತಮಗೆ ನೆಮ್ಮದಿಯ ಜೀವನ ನಡೆಸಲು ಅವಕಾಶ ಮಾಡಿಕೊಡಬೇಕು ಎಂದು ಸ್ಥಳೀಯರು ಆಗ್ರಹಿಸಿದರು.
ಮನವಿ ಸ್ವೀಕರಿಸಿದ ಅಧ್ಯಕ್ಷೆ ನಾಗಲಕ್ಷ್ಮಿ ಚೌದರಿ ಅವರು, ಈ ಗಂಭೀರ ಸಮಸ್ಯೆಯ ಕುರಿತು ಸಂಬಂಧಪಟ್ಟ ಅಧಿಕಾರಿಗಳೊಂದಿಗೆ ಚರ್ಚಿಸಿ, ಸೂಕ್ತ ಕ್ರಮ ಕೈಗೊಳ್ಳುವ ಭರವಸೆ ನೀಡಿದ್ದಾರೆ. ಬೆಳಗಾವಿ ಜಿಲ್ಲಾಡಳಿತದ ಕಡೆಗಣನೆಯ ಬಳಿಕ, ಇದೀಗ ಮಹಿಳಾ ಆಯೋಗದಿಂದಲಾದರೂ ತಮಗೆ ನ್ಯಾಯ ಸಿಗಬಹುದೇ ಎಂಬ ನಿರೀಕ್ಷೆಯಲ್ಲಿ ಗಸ್ತಿ ಕುಟುಂಬ ಹಾಗೂ ಸ್ಥಳೀಯ ನಿವಾಸಿಗಳಿದ್ದಾರೆ.



