ಹಣಕಾಸು ಆಯೋಗದ ಅನುದಾನ ಬಿಡುಗಡೆಯಲ್ಲಿ ನಿರಂತರ ವಿಳಂಬ
ಬಿಡುಗಡೆ ಮಾಡಲು ಕೋರಿ ಕೇಂದ್ರ ಸಚಿವರಿಗೆ ಪ್ರಿಯಾಂಕ್ ಖರ್ಗೆ ಪತ್ರ
ಕರ್ನಾಟಕದ ಗ್ರಾಮ ಪಂಚಾಯತಿಗಳಿಗೆ ಕೇಂದ್ರ ಸರ್ಕಾರದಿಂದ ಬಾಕಿ ಇರುವ 15ನೇ ಹಣಕಾಸು ಆಯೋಗದ ಅನುದಾನವನ್ನು ತಕ್ಷಣ ಬಿಡುಗಡೆ ಮಾಡಲು ಗಮನಹರಿಸಬೇಕೆಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಹಾಗೂ ಮಾಹಿತಿ ಮತ್ತು ಜೈವಿಕ ತಂತ್ರಜ್ಞಾನ ಸಚಿವ ಪ್ರಿಯಾಂಕ್ ಖರ್ಗೆ ಅವರು ಕೇಂದ್ರ ಪಂಚಾಯತ್ ರಾಜ್ ಸಚಿವ ರಾಜೀವ್ ರಂಜನ್ ಸಿಂಗ್ ಅವರಿಗೆ ಪತ್ರ ಬರೆದು ಕೋರಿದ್ದಾರೆ.
2025–26ನೇ ಹಣಕಾಸು ವರ್ಷದ 15 ನೇ ಹಣಕಾಸು ಆಯೋಗದ ಅನುದಾನ ಬಿಡುಗಡೆಯಲ್ಲಿನ ನಿರಂತರ ವಿಳಂಬದ ಕುರಿತು 2025ರ ಡಿಸೆಂಬರ್ 08ರಂದು ಬರೆದ ಪತ್ರವನ್ನು ನೆನಪಿಸಿರುವ ಸಚಿವ ಪ್ರಿಯಾಂಕ್ ಖರ್ಗೆ ಅವರು 2025ರ ಆಗಸ್ಟ್ ತಿಂಗಳಿನಲ್ಲಿ ಗ್ರಾಮ ಪಂಚಾಯಿತಿ ಅಭಿವೃದ್ಧಿ ಯೋಜನೆಗಳನ್ನು (GPDP ಗಳು) ಸಕಾಲಿಕವಾಗಿ ಅಪ್ಲೋಡ್ ಮಾಡಿರುವುದನ್ನು ಖಚಿತಪಡಿಸಿಕೊಂಡು ರಾಜ್ಯ ಸರ್ಕಾರವು 2025ರ ಜುಲೈ 08 ಮತ್ತು ಸೆಪ್ಟೆಂಬರ್ 24ರಂದು ಅಗತ್ಯವಿರುವ ಅನುದಾನ ವರ್ಗಾವಣೆ ಪ್ರಮಾಣಪತ್ರಗಳನ್ನು ಸಲ್ಲಿಸಿದ್ದರೂ ಸಹ ಕೇಂದ್ರ ಸರ್ಕಾರ ಅನುದಾನ ನೀಡುವುದನ್ನು ವಿಳಂಬ ಮಾಡಿದೆ ಎಂಬ ಅಂಶವನ್ನು ಪತ್ರದಲ್ಲಿವಿವರಿಸಿದ್ದಾರೆ.
ಗ್ರಾಮ ಪಂಚಾಯಿತಿಗಳ ಪ್ರಸ್ತುತ ಅವಧಿ 2026ರ ಜನವರಿ-ಫೆಬ್ರವರಿ ತಿಂಗಳಿನೊಳಗೆ ಮುಕ್ತಾಯಗೊಳ್ಳಲಿದ್ದು, ಅನುದಾನದ ಕೊರತೆಯಿಂದಾಗಿ ಅಭಿವೃದ್ಧಿ ಕಾರ್ಯಗಳನ್ನು ಕೈಗೊಳ್ಳಲು ಸಾಧ್ಯವಾಗುತ್ತಿಲ್ಲ, ಕರ್ನಾಟಕವು ಗ್ರಾಮೀಣ ವಿಕೇಂದ್ರೀಕರಣದಲ್ಲಿ ನಿರಂತರವಾಗಿ ಮುಂಚೂಣಿಯಲ್ಲಿದೆ ಮತ್ತು ಪಂಚಾಯತ್ ಮಟ್ಟದ ಆಡಳಿತವನ್ನು ಉಳಿಸಿಕೊಳ್ಳಲು ಮತ್ತು ಅವುಗಳ ಅವಧಿ ಮುಗಿಯುವ ಮೊದಲೇ ನಿರ್ಣಾಯಕ ಯೋಜನೆಗಳನ್ನು ಪೂರ್ಣಗೊಳಿಸಲು ಕೇಂದ್ರದಿಂದ ಅನುದಾನಗಳ ಸಕಾಲಿಕ ಬಿಡುಗಡೆ ಅತ್ಯಗತ್ಯವಾಗಿದೆ ಎಂದು ಪತ್ರದಲ್ಲಿ ತಿಳಿಸಿದ್ದು ಬಾಕಿ ಇರುವ 2025–26ನೇ ಹಣಕಾಸು ವರ್ಷದ 15 ನೇ ಹಣಕಾಸು ಆಯೋಗದ ಅನುದಾನವನ್ನು ಬಿಡುಗಡೆಗೊಳಿಸಬೇಕೆಂದು ಮನವಿ ಮಾಡಿದ್ದಾರೆ.



