ವೈದ್ಯಕೀಯ ಶಿಕ್ಷಣ ಹಾಗೂ ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಸಚಿವರಾದ ಶರಣ ಪ್ರಕಾಶ ಪಾಟೀಲ ಅವರು ಗುರುವಾರ ಬೆಂಗಳೂರಿನ ಬೌರಿಂಗ್ ಆಸ್ಪತ್ರೆಗೆ ಭೇಟಿ ನೀಡಿ ದುರಂತ ಸಂಭವಿಸಿದ ಸ್ಥಳವನ್ನು ಪರಿಶೀಲಿಸಿದರು ಹಾಗೂ ಗಾಯಾಳುಗಳನ್ನು ಭೇಟಿ ಮಾಡಿದರು.
ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ರಾಜ್ಯದ ಎಲ್ಲಾ ಆಸ್ಪತ್ರೆಗಳ ಪರಿಶೀಲನೆಗೆ ಸೂಚನೆ ನೀಡಲಾಗಿದೆ ಎಂದು ಹೇಳಿದರು. ವಿಶೇಷವಾಗಿ ಬೆಂಗಳೂರಿನ ಮೇಲೆ ಗಮನ ಹರಿಸಲಾಗಿದ್ದು, ಬೌರಿಂಗ್ ಆಸ್ಪತ್ರೆ, ವಿಕ್ಟೋರಿಯಾ ಆಸ್ಪತ್ರೆ, ಕೆ.ಸಿ. ಜನರಲ್ ಆಸ್ಪತ್ರೆ, ಸಿ.ವಿ. ರಾಮನಗರ ಆಸ್ಪತ್ರೆ ಸೇರಿದಂತೆ ಎಲ್ಲಾ ಸರ್ಕಾರಿ ಆಸ್ಪತ್ರೆಗಳ ಕಾಂಪೌಂಡ್ ಗೋಡೆಗಳು ಮತ್ತು ಕಟ್ಟಡಗಳ ಗುಣಮಟ್ಟ ಪರಿಶೀಲನೆಗೆ ಆದೇಶಿಸಲಾಗಿದೆ ಎಂದು ತಿಳಿಸಿದ್ದಾರೆ.
ಎಲ್ಲಾ ಸಂಬಂಧಿತ ಅಧಿಕಾರಿಗಳಿಗೆ ಪರಿಶೀಲನೆ ನಡೆಸಿ ಒಂದು ವಾರದೊಳಗೆ ವರದಿ ಸಲ್ಲಿಸಲು ಸೂಚಿಸಲಾಗಿದೆ ಎಂದು ಅವರು ಹೇಳಿದರು.



