ಎಸ್ ಐಆರ್ ಅಧಿಕಾರಿಗಳ ಮೇಲೆ ರಾಜ್ಯ ಸರ್ಕಾರದ ಒತ್ತಡ: ಬಸವರಾಜ ಬೊಮ್ಮಾಯಿ
ಮತದಾರರ ಪಟ್ಟಿಗೆ ಅನರ್ಹರನ್ನು ಸೇರಿಸದಂತೆ ವಿಜಿಲೆನ್ಸ್ ತಂಡಗಳಿಗೆ ಆಯೋಗ ಖಡಕ್ ಸೂಚನೆ ನೀಡಲಿ: ಬಸವರಾಜ ಬೊಮ್ಮಾಯಿ
ಬೆಂಗಳೂರು: ಎಸ್ ಐ ಆರ್ ಪ್ರಕ್ರಿಯೆಯಲ್ಲಿ ರಾಜ್ಯದ ಅಧಿಕಾರಿಗಳು ಅನರ್ಹರನ್ನು ಮತದಾರರ ಪಟ್ಟಿಗೆ ಸೇರಿಸದಂತೆ ಹಾಗೂ ಅರ್ಹ ಮತದಾರರ ಹೆಸರು ಕೈಬಿಡದಂತೆ ಚುನಾವಣಾ ಆಯೋಗವು ಈಗಾಗಲೇ ಪ್ರತಿಯೊಂದು ಜಿಲ್ಲೆಯಲ್ಲಿ ರಚಿಸಿರುವ ವಿಜಿಲೆನ್ಸ್ ತಂಡಗಳಿಗೆ ಖಡಕ್ ಸೂಚನೆ ನೀಡಬೇಕು. ಅಲ್ಲದೆ, ಈ ಕುರಿತು ಚುನಾವಣಾ ಆಯೋಗವು ಸಾರ್ವಜನಿಕವಾಗಿ ಸ್ಪಷ್ಟ ನಿರ್ದೇಶನವನ್ನು ಪ್ರಕಟಿಸಬೇಕೆಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ಆಗ್ರಹಿಸಿದ್ದಾರೆ.
ಈ ಕುರಿತು ಎಕ್ಸ್ ಮಾಡಿರುವ ಅವರು, ರಾಜ್ಯದಲ್ಲಿ ಎಸ್ಐಆರ್ (Special Intensive Revision) ಪ್ರಕ್ರಿಯೆ ನಿನ್ನೆಯಿಂದ ಎನ್ಯೂಮರೇಷನ್ ಫಾರ್ಮ್ ವಿತರಣೆಯೊಂದಿಗೆ ಆರಂಭವಾಗಿದೆ. ಈ ಹಿನ್ನೆಲೆಯಲ್ಲಿ, ಮತದಾರರ ಪಟ್ಟಿಯ ವಿಶೇಷ ಪರಿಷ್ಕರಣೆ ವೇಳೆ ರಾಜ್ಯದ ಕೆಲ ಅಧಿಕಾರಿಗಳು ರಾಜ್ಯ ಸರ್ಕಾರ ಹಾಗೂ ಕಾಂಗ್ರೆಸ್ ಪಕ್ಷದ ಒತ್ತಡಕ್ಕೆ ಮಣಿದು ಕಾರ್ಯನಿರ್ವಹಿಸುವಂತೆ ಸೂಚನೆ ನೀಡಲಾಗಿದೆ ಎಂಬ ಸುದ್ದಿಗಳು ಹರಿದಾಡುತ್ತಿವೆ ಎಂದು ತಿಳಿಸಿದ್ದಾರೆ.
ಈ ಸಂದರ್ಭದಲ್ಲಿ, ಪ್ರತಿಯೊಂದು ಜಿಲ್ಲೆಯ ಜಿಲ್ಲಾ ಚುನಾವಣಾಧಿಕಾರಿಗಳು, ಜಿಲ್ಲಾಧಿಕಾರಿಗಳು, ಚುನಾವಣಾ ಕಾರ್ಯ ನೋಡಿಕೊಳ್ಳುವ ಅಧಿಕಾರಿಗಳು, ಪಿಡಿಒಗಳು ಹಾಗೂ ಮತದಾರರ ಪರಿಷ್ಕರಣೆಯಲ್ಲಿ ತೊಡಗಿರುವ ಕಂದಾಯ ಇಲಾಖೆ ಅಧಿಕಾರಿಗಳು ಯಾವುದೇ ರೀತಿಯ ರಾಜಕೀಯ ಒತ್ತಡಕ್ಕೆ ಮಣಿಯದೆ, ಸಂಪೂರ್ಣ ನಿಷ್ಪಕ್ಷಪಾತವಾಗಿ ಕಾರ್ಯನಿರ್ವಹಿಸಬೇಕು. ಅನರ್ಹರನ್ನು ಮತದಾರರ ಪಟ್ಟಿಗೆ ಸೇರಿಸದಂತೆ ಹಾಗೂ ಅರ್ಹ ಮತದಾರರ ಹೆಸರು ಕೈಬಿಡದಂತೆ ಚುನಾವಣಾ ಆಯೋಗವು ಈಗಾಗಲೇ ಪ್ರತಿಯೊಂದು ಜಿಲ್ಲೆಯಲ್ಲಿ ರಚಿಸಿರುವ ವಿಜಿಲೆನ್ಸ್ ತಂಡಗಳಿಗೆ ಖಡಕ್ ಸೂಚನೆ ನೀಡಬೇಕು. ಅಲ್ಲದೆ, ಈ ಕುರಿತು ಚುನಾವಣಾ ಆಯೋಗವು ಸಾರ್ವಜನಿಕವಾಗಿ ಸ್ಪಷ್ಟ ನಿರ್ದೇಶನವನ್ನು ಪ್ರಕಟಿಸಬೇಕೆಂದು ಆಗ್ರಹಿಸಿದ್ದಾರೆ.



